21.2 C
Karnataka
Sunday, September 22, 2024

    ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸುವ ಸವಾಲಿಗೆ ಸರ್ಕಾರ ಸಿದ್ಧವೇ ಎಂದು ಕೇಳಿದ ಡಿ ಕೆ ಶಿವಕುಮಾರ್

    Must read

    ಕೋವಿಡ್ 3ನೇ ಅಲೆಯಿಂದ ಜನರನ್ನು ರಕ್ಷಿಸಲು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ. 80 ಜನರಿಗೆ ಲಸಿಕೆ ಹಾಕುವ ಸವಾಲಿಗೆ ಸಿದ್ದವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ”ಮೂರು ತಿಂಗಳೊಳಗೆ ರಾಜ್ಯದ ಶೇಕಡ 80 ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಕೊರೊನಾ 3 ನೇ ಅಲೆಯಿಂದ ರಾಜ್ಯದ ರಕ್ಷಣೆ ಮಾಡಬಹುದಾಗಿದೆ” ಎಂದು ಹೇಳಿದರು.

    ”ಅಕ್ಟೋಬರ್‌ ತಿಂಗಳಲ್ಲಿ ಕೊರೊನಾ 3ನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ 3ನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ದವಿದೆಯೇ? ಎಂದು ಪ್ರಶ್ನೆ ಮಾಡುತ್ತಿದ್ದೇನೆ” ಎಂದರು.

    ” ವ್ಯಾಕ್ಸಿನೇಷನ್ ಬಗ್ಗೆ ಕೇವಲ ಮಾತನಾಡಿದರೆ ಸಾಲದು. ಕೇವಲ ಒಂದು ಡೋಸ್ ಲಸಿಕೆ ಹಾಕಿದರೆ ಕೋವಿಡ್ ತೀವ್ರತೆಯನ್ನು ತಗ್ಗಿಸಲಾಗದು. ಕೊರೊನಾದಿಂದ ಪೂರ್ಣ ರಕ್ಷಣೆ ಸಾಧ್ಯವಾಗಲು ಎರಡೂ ಡೋಸ್ ಪಡೆದಿರಬೇಕು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಸೆಪ್ಟೆಂಬರ್‌ ಅಂತ್ಯದೊಳಗೆ ಶೇ.80 ವಯಸ್ಕರಿಗೆ ಎರಡೂ ಡೋಸ್ ಹಾಕುವ ಹೊಣೆಗಾರಿಕೆ ಯನ್ನು ಸರ್ಕಾರ ನಿರ್ವಹಿಸಲೇಬೇಕು. ಈ ಸವಾಲಿನಲ್ಲಿ ವಿಫಲವಾದರೆ, 3ನೇ ಅಲೆಯ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ” ಎಂದು ಕೆಪಿಸಿಸಿ ಅಧ್ಯಕ್ಷರು ಎಚ್ಚರಿಸಿದರು.

    ಈ ಸವಾಲು ಅಸಾಧ್ಯವಾದುದೇನೂ ಅಲ್ಲ. ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್‌ ಮಾಡಲು ಒತ್ತು ಕೊಡಬೇಕು. ಬಿಜೆಪಿ ನಾಯಕರು ಲಸಿಕೆ ನೀಡಿಕೆಯಲ್ಲೂ ಅಪರ- ತಪರಾ ಮಾಡುವುದನ್ನು ನಿಲ್ಲಿಸಿ, ಎಲ್ಲರಿಗೂ ಲಸಿಕೆ ಹಾಕಿಸಿ ಜನರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು” ಎಂದು ತಾಕೀತು ಮಾಡಿದರು.

    ”ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ.

    ”ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2 ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ” ಎಂದು ಸಲಹೆ ಮಾಡಿದರು.

    ” ಕಾಂಗ್ರೆಸ್ ಪಕ್ಷದ ನಾಯಕರು ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನೇಷನ್‌ ಶಿಬಿರಗಳನ್ನು ನಡೆಸಿ, 1 ಲಕ್ಷ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದಾರೆ. ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅನುಮತಿ ಕೇಳಿದರೂ ಸರ್ಕಾರ ಕೊಡಲಿಲ್ಲ. ಈ ಉದ್ದೇಶಕ್ಕೆ ಶಾಸಕರ ನಿಧಿ ಬಳಸುವ ಸದಾಶಯಕ್ಕೆ ಸರ್ಕಾರ ಸಮ್ಮತಿಸಲಿಲ್ಲ. ನಮ್ಮ ಸಹಾಯ ಅಗತ್ಯವಿಲ್ಲ ಎಂದರೆ ತೊಂದರೆ ಇಲ್ಲ. ಕಾಲಮಿತಿಯಲ್ಲಿ ಸರ್ಕಾರ ತ್ವರಿತವಾಗಿ ಎಲ್ಲರಿಗೂ ಲಸಿಕೆ ಹಾಕಿಸಿ, ಜನರನ್ನು ರಕ್ಷಣೆ ಮಾಡಲಿ” ಎಂದು ಶಿವಕುಮಾರ್ ಹೇಳಿದರು.

    ಲಸಿಕೆ ಹಾಕಿಸಿಕೊಳ್ಳುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಲು ಕೆಪಿಸಿಸಿ ಮಕ್ಕಳಿಗಾಗಿ ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ ನಡೆಸಿದೆ. ವಯಸ್ಕರು ವ್ಯಾಕ್ಸಿನ್ ಪಡೆಯಲು ಪ್ರೇರಣೆಯಾಗುವಂತೆ 20 ಸಾವಿರಕ್ಕೂ ಹೆಚ್ಚು ಮಕ್ಕಳು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಉತ್ತಮ ವಿಡಿಯೋ ಮಾಡಿದ 22 ಮಕ್ಕಳಿಗೆ ಆ್ಯಂಡ್ರಾಯ್ಡ್ ಟ್ಯಾಬ್ ಗಳನ್ನು ಬಹುಮಾನವಾಗಿ ಪಕ್ಷದ ವತಿಯಿಂದ ನೀಡಲಾಗಿದೆ. ನಾವಂತೂ ಜನರನ್ನು ಲಸಿಕೆ ಪಡೆಯಲು ಪ್ರೇರೇಪಿಸುತ್ತಿದ್ದೇವೆ. ಆದರೆ, ಲಸಿಕೆ ದಾಸ್ತಾನು ಕೊರತೆಯೇ ಪ್ರಮುಖ ಸಮಸ್ಯೆಯಾಗಿದೆ. ಆಡಳಿತ ನಡೆಸುವವರು ಎಚ್ಚೆತ್ತುಕೊಂಡು ಕೆಲಸ ಮಾಡಲಿ” ಎಂದು ಕಿವಿಮಾತು ಹೇಳಿದರು.

    ”ಮೂರು ತಿಂಗಳೊಳಗೆ ಶೇಕಡ 80 ಜನರಿಗೆ ಎರಡು ಡೋಸ್ ಲಸಿಕೆ ಹಾಕಿಸಿ, ಕೋವಿಡ್ 3 ನೇ ಅಲೆಯಿಂದ ಜನರನ್ನು ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ತಾಕೀತು ಮಾಡಲು ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು” ಎಂದು ಶಿವಕುಮಾರ್ ತಿಳಿಸಿದರು

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!