21.5 C
Karnataka
Sunday, September 22, 2024

    NEP ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ನಾಗ್ಪುರ ಶಿಕ್ಷಣ ನೀತಿ: ಡಿ.ಕೆ. ಶಿವಕುಮಾರ್ ಆಕ್ರೋಶ

    Must read

    BENGALURU SEPT 4

    ‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

    ‘ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ.

    ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ.

    ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ. ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ.

    ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ.

    ಈ ನೀತಿಯಲ್ಲಿ ಕೆಲವು ಉತ್ತಮ ಅಂಶಗಳು ಇರಬಹುದು. ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ.

    ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ.

    ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ.

    ಪಕ್ಷ ಸಂಘಟನೆಗೆ ಜಿಲ್ಲಾವಾರು ಮುಖಂಡರ ಸಭೆ:

    ಇಂದು ಮತ್ತು ನಾಳೆ ಕಾಂಗ್ರೆಸ್ ಪಕ್ಷದ ಜಿಲ್ಲಾವಾರು ಅಧ್ಯಕ್ಷರುಗಳು, ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳನ್ನು ಕರೆದು ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲೂಕೂ ಪಂಚಾಯ್ತಿ, ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಮುಂದೆ ಯಾವ ರೀತಿ ಸಜ್ಜಾಗಬೇಕು ಎಂಬುದರ ಬಗ್ಗೆ ಅವರ ಅಭಿಪ್ರಾಯ ಪಡೆದು, ಮಾರ್ಗದರ್ಶನ ನೀಡಲಾಗುತ್ತಿದೆ.

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಪ್ರತಿ ಗ್ರಾಮಪಂಚಾಯ್ತಿಯಲ್ಲೂ ‘ಗಾಂಧೀಜಿ ಗ್ರಾಮ ಸ್ವರಾಜ್ಯ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ನಮ್ಮೆಲ್ಲ ನಾಯಕರು ಅಕ್ಟೋಬರ್ ತಿಂಗಳಲ್ಲಿ ದಿನಕ್ಕೆ 2 ಗ್ರಾಮ ಪಂಚಾಯ್ತಿಯಲ್ಲಿ ಪಕ್ಷದ ಸಭೆ ನಡೆಸಬೇಕು. ಅಲ್ಲಿ ಪ್ರತಿಭಟನೆ ಅಥವಾ ಕಾರ್ಯಕರ್ತರ ಸಭೆ ಮಾಡಬಹುದು. ಕಡ್ಡಾಯವಾಗಿ ತಿಂಗಳಲ್ಲಿ ನಿತ್ಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸಭೆಗಳನ್ನು ಮಾಡಬೇಕು.

    ಈ ಸಭೆಯಲ್ಲಿ ಎಲ್ಲ ನಾಯಕರು ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷದ ಸಂಘಟನೆ ದೃಷ್ಟಿಯಿಂದ, ಎಲ್ಲೆಲ್ಲಿ ಸಮಿತಿ ರಚನೆ ಆಗಬೇಕು, ಯಾವ ವಿಭಾಗಗಳಲ್ಲಿ ಪದಾಧಿಕಾರಿಗಳ ನೇಮಕವಾಗಬೇಕು ಎಂಬುದರ ಬಗ್ಗೆ ಗಮನ ಹರಿಸಬೇಕು. ಈ ತಿಂಗಳಲ್ಲೇ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಆಯಾ ಘಟಕಗಳ ಸಮಿತಿ ಮಾಡಬೇಕು. ಅವರ ಸಭೆಗಳು ಕೂಡ ಆರಂಭವಾಗಬೇಕು.

    ಈ ನಿಟ್ಟಿನಲ್ಲಿ ಇಂದು ಹಾಗೂ ನಾಳೆ ಸಂಜೆವರೆಗೂ ಈ ಸಭೆಗಳು ನಡೆಯಲಿವೆ. ಈಗಾಗಲೇ ನಾವು ಪಕ್ಷದಲ್ಲಿ ಸಹಕಾರ, ಸಂಚಾರ, ಸಾಂಸ್ಕೃತಿಕ ಘಟಕಗಳ ನೇಮಕ ಮಾಡುತ್ತಿದ್ದು, ಎಲ್ಲ ಘಟಕಗಳಲ್ಲೂ ಬ್ಲಾಕ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಸಮಿತಿ ರಚಿಸುತ್ತಿದ್ದೇವೆ.

    ಕರ್ನಾಟಕದ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರು ವಿಭಾಗೀಯ ಮಟ್ಟದ ಸಭೆ ಮಾಡಿದ್ದರು. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು, ಪಕ್ಷದ ಸಂಘಟನೆ ವಿಚಾರವಾಗಿ ಕೆಲವು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಜಾರಿಗೊಳಿಸಲು ನಾವು ಕ್ರಮಕೈಗೊಳ್ಳುತ್ತಿದ್ದೇವೆ.

    ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ:

    ವಿಧಾನ ಪರಿಷತ್ ಸೇರಿದಂತೆ ಮುಂಬರುವ ಮುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನಗಳ ಕಾಲಾವಕಾಶ ನೀಡಿದ್ದೇವೆ. ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಬೇರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಅರ್ಜಿಯನ್ನು ಸದ್ಯದಲ್ಲೇ ಕರೆಯಲಾಗುವುದು. ಆ ಬಗ್ಗೆ ಅಲ್ಲಿನ ನಾಯಕರ ಜತೆ ಚರ್ಚೆ ಮಾಡಿ ವಾಸ್ತವಾಂಶ ಹಾಗೂ ಅಭಿಪ್ರಾಯ ಪಡೆಯುತ್ತಿದ್ದೇನೆ. ಈ ತಿಂಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ.’ ಎಂದು ಡಿ ಕೆ ಶಿವಕುಮಾರ್ ಹೇಳಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!